
ತಮಿಳುನಾಡಿನ ಸೇಲಂ ಸಮೀಪ ಭಾರೀ ಅನಾಹುತವೊಂದು ತಪ್ಪಿದ ಘಟನೆ ನಡೆದಿದೆ. KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ಮದುರೈಗೆ ತೆರಳುತ್ತಿದ್ದ ಈ ಪಲ್ಲಕ್ಕಿ ಬಸ್ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಸೇಲಂ ಬಳಿ ಸಾಗುತ್ತಿದ್ದಾಗ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದೆ. ಅಪಾಯವನ್ನು ಅರಿತ ಚಾಲಕ ತಕ್ಷಣ ಬಸ್ ಅನ್ನು ರಸ್ತೆ ಬದಿಯ ಮಣ್ಣಿನ ಗುಡ್ಡದ ಮೇಲೆ ಹತ್ತಿಸಿ ನಿಲ್ಲಿಸಿದ್ದರಿಂದ ದೊಡ್ಡ ದುರಂತ ತಪ್ಪಿದೆ.
ಅಪಘಾತದಲ್ಲಿ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ಬಳಿಕ ಭಯಭೀತರಾದ ಪ್ರಯಾಣಿಕರು ಬಸ್ಸಿನಿಂದ ಇಳಿದು ಸುರಕ್ಷಿತವಾಗಿ ಹೊರಬಂದಿದ್ದಾರೆ.
ಚಾಲಕ ನಿದ್ದೆಯ ಮಂಪರಿನಲ್ಲಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಯಾಣಿಕರನ್ನು ಪರ್ಯಾಯ ಬಸ್ಸಿನ ಮೂಲಕ ಮದುರೈಗೆ ಕಳುಹಿಸಲಾಗಿದೆ.

