
ಬೆಂಗಳೂರು ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ಬೆನ್ನಲ್ಲೇ ಇಬ್ಬರು ಇಂಜಿನಿಯರ್ಗಳನ್ನು ಅಮಾನತು ಮಾಡಲಾಗಿದೆ. ಸಹಾಯಕ ಕಾರ್ಯನಿರ್ವಹಕ ಅಭಿಯಂತರ ಆರ್.ಟಿ ರುದ್ರಮುನಿ ಹಾಗೂ ಕಾರ್ಯನಿರ್ವಹಕ ಅಭಿಯಂತರ ಮೊಹಮದ್ ಜಾವೇದ್ ವಿರುದ್ಧ ಕ್ರಮ ಜರುಗಿದೆ.
ಘಟನೆ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದ್ದು, 7 ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ತನಿಖಾ ಸಮಿತಿಯಲ್ಲಿ ತಹಶೀಲ್ದಾರ್, ಪಿಡಬ್ಲ್ಯೂಡಿ ನಿವೃತ್ತ ಮುಖ್ಯ ಇಂಜಿನಿಯರ್ ಸೇರಿದಂತೆ ಆರು ಮಂದಿ ಅಧಿಕಾರಿಗಳು ಇದ್ದಾರೆ.
ಇತ್ತ ಕರ್ನಾಟಕ ಲೋಕಾಯುಕ್ತ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ನ್ಯಾಯಮೂರ್ತಿ ಬಿಎಸ್ ಪಾಟೀಲ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಡೆಯ ಅಡಿಪಾಯ ದುರ್ಬಲವಾಗಿರುವುದೇ ದುರಂತಕ್ಕೆ ಪ್ರಮುಖ ಕಾರಣ ಎಂದು ಅವರು ಅಭಿಪ್ರಾಯಪಟ್ಟರು. ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕಿಡಿಕಾರಿದ ಲೋಕಾಯುಕ್ತರು, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

