
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲಿನಲ್ಲಿ ದೈವದ ಭಂಡಾರ ಮೆರವಣಿಗೆ ವೇಳೆ ಅವಘಡ ಸಂಭವಿಸಿದೆ.
ಪಲ್ಲಕ್ಕಿಯಲ್ಲಿ ದೈವದ ಭಂಡಾರವನ್ನು ಕೊಂಡೊಯ್ಯುತ್ತಿದ್ದ ವೇಳೆ ಕಾಲು ಸಂಕ ಏಕಾಏಕಿ ಕುಸಿದು ಬಿದ್ದಿದೆ. ಪರಿಣಾಮ ಪಲ್ಲಕ್ಕಿ ಉರುಳಿ ಬಿದ್ದು, ಅದನ್ನು ಹೊತ್ತುಕೊಂಡು ಹೋಗುತ್ತಿದ್ದವರ ಮೇಲೆ ಕಲ್ಲಿನ ಬೀಮ್ ಬಿದ್ದಿದೆ.
ಈ ಅವಘಡದಲ್ಲಿ ಸುನಿಲ್ ಶೆಟ್ಟಿ, ಲೋಕೇಶ್ ಭಂಡಾರಿ ಸೇರಿದಂತೆ ಒಟ್ಟು 8 ಮಂದಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೆರವಣಿಗೆ ಸಂದರ್ಭದಲ್ಲಿ ಕೊಂಬು, ಕಹಳೆ ಮತ್ತು ಬ್ಯಾಂಡ್ ವಾದ್ಯಗಳೊಂದಿಗೆ ಭಕ್ತರು ಸಾಗುತ್ತಿದ್ದರು. ಸಂಕದ ಮೇಲೆ ಭಾರ ಹೆಚ್ಚಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.
ಘಟನೆಯಲ್ಲಿ ದೈವದ ಮೊಗಮೂರ್ತಿ ಸೇರಿದಂತೆ ಧಾರ್ಮಿಕ ವಸ್ತುಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

